ಚನ್ನಪಟ್ಟಣ ಕ್ಷೇತ್ರದಲ್ಲಿ ನನ್ನ ಕುಟುಂಬದವರು ಸ್ಪರ್ಧಿಸಲ್ಲ: ಆದರೆ ನನ್ನ ಹೆಸರೆ ಓಡ್ತಿದೆ - ಡಿ.ಕೆ.ಶಿವಕುಮಾರ್

| Published : Oct 14 2024, 08:08 AM IST

dk shivakumar
ಚನ್ನಪಟ್ಟಣ ಕ್ಷೇತ್ರದಲ್ಲಿ ನನ್ನ ಕುಟುಂಬದವರು ಸ್ಪರ್ಧಿಸಲ್ಲ: ಆದರೆ ನನ್ನ ಹೆಸರೆ ಓಡ್ತಿದೆ - ಡಿ.ಕೆ.ಶಿವಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಆದರೆ ಕ್ಷೇತ್ರದಲ್ಲಿ ನನ್ನ ಹೆಸರೇ ಓಡಾಡುತ್ತಿದೆ, ಹೀಗಾಗಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮೈಸೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಆದರೆ ಕ್ಷೇತ್ರದಲ್ಲಿ ನನ್ನ ಹೆಸರೇ ಓಡಾಡುತ್ತಿದೆ, ಹೀಗಾಗಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. 

ಭಾನುವಾರ ಸುದ್ದಿಗಾರರೊಡನೆ ಮಾತನಾಡಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಹಿನ್ನಡೆ ಆಗಿತ್ತು. ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದ ಬುನಾದಿ ಬಲಗೊಳಿಸುತ್ತಿದ್ದೇವೆ. ನಮ್ಮ ಕೆಲಸವನ್ನು ಮೆಚ್ಚಿಕೊಂಡು ಮತದಾರರು ಮತ್ತು ಜನ ಕೈಹಿಡಿಯುವ ವಿಶ್ವಾಸವಿದೆ ಎಂದರು.

ಜೆಡಿಎಸ್ ಪಕ್ಷದಿಂದ ಯಾರನ್ನು ಬೇಕಾದರೂ ಚುನಾವಣೆಗೆ ನಿಲ್ಲಿಸಲಿ. ಅದು ಅವರಿಗೆ ಬಿಟ್ಟ ವಿಷಯ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಚನ್ನಪಟ್ಟಣದಲ್ಲಿ ವ್ಯಕ್ತಿ ಮೇಲೆ ಚುನಾವಣೆ ನಡೆಯುವುದಿಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ನಡೆಸಲು ನಾನು ಹೊರಟಿದ್ದೇನೆ. ಚನ್ನಪಟ್ಟಣ ಚುನಾವಣೆಗೆ ನನ್ನ ಕುಟುಂಬದವರು ಸ್ಪರ್ಧಿಸುವುದಿಲ್ಲ. ಆದರೆ ಅಲ್ಲಿ ನನ್ನ ಹೆಸರೇ ಓಡಾಡುತ್ತಿರುವುದರಿಂದ ನಾನೇ ಅಭ್ಯರ್ಥಿ ಎಂದರು.

ಮಡಿಕೇರಿಯ ವಿವಿಧ ದೇವಾಲಯಗಳಿಗೆ ಭೇಟಿ: ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಾಯಿ ಕಾವೇರಿ ಮಾತೆ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾಗಿ ಡಿ.ಕೆ. ಶಿವಕುಮಾರ್‌ ಹೇಳಿದರು. ನಾಡಿನಲ್ಲಿ ಹಿಂದಿನಿಂದಲೂ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಬರಲಾಗಿದೆ. ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು ಎಲ್ಲರಲ್ಲಿ ಸಂತಸ ತಂದಿದೆ ಎಂದು ಹೇಳಿದರು‌.

ನಗರದ ಶಕ್ತಿ ದೇವತೆಗಳಾದ ಕುಂದೂರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಶ್ರೀ ಕೋಟೆ ಗಣಪತಿ, ಪೇಟೆ ಶ್ರೀ ರಾಮಮಂದಿರ, ಶ್ರೀ ಕೊದಂಡರಾಮ ದೇವಾಲಯ, ಶ್ರೀ ಮುತ್ತಪ್ಪ ದೇವಾಲಯ, ಕರವಾಲೇ ಭಗವತಿ ದೇವಾಲಯ, ಶ್ರೀ ಚೌಡೇಶ್ವರಿ ದೇವಾಲಯ, ವಿಜಯ ವಿನಾಯಕ, ದೇಚೂರು ಶ್ರೀರಾಮ ಮಂದಿರ ಹೀಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷ ಪ್ರಕಾಶ್ ಆಚಾರ್ಯ, ದಶಮಂಟಪ ಸಮಿತಿ ಅಧ್ಯಕ್ಷ ಜಗದೀಶ್ , ಪ್ರಮುಖರಾದ ಟಿ.ಪಿ. ರಮೇಶ್, ಕೆ.ಪಿ. ಚಂದ್ರಕಲಾ, ಎಚ್.ಎಸ್. ಚಂದ್ರಮೌಳಿ ಇತರರು ಇದ್ದರು.