ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಂದಿನ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್‌ ಅವರು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳ

 ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಂದಿನ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್‌ ಅವರು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.

ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌ ಅವರ ಹೆಸರು ಸೂಚಿಸಲಿದ್ದಾರೆ. ಶಾಸಕಾಂಗ ಪಕ್ಷದ ಸದಸ್ಯರು ಅವಿರೋಧವಾಗಿ ನೂತನ ನಾಯಕರನ್ನಾಗಿ ಶಿವಕುಮಾರ್‌ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಿರ್ಣಯ ಆಧರಿಸಿ ಎಐಸಿಸಿಯು ನೂತನ ಮುಖ್ಯಮಂತ್ರಿ ಹೆಸರನ್ನು ಅಧಿಕೃತವಾಗಿ ಘೋಷಿಸಲಿದೆ.

ಇದೇ ವೇಳೆ ಸಿಎಲ್‌ಪಿ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ದಿನಾಂಕದ ಬಗ್ಗೆಯೂ ನಿರ್ಧಾರವಾಗಲಿದೆ. ವಿಧಾನಸೌಧ ಭವ್ಯಮೆಟ್ಟಿಲಿನ ಎದುರು ನಡೆಯುತ್ತಿರುವ ಸಿದ್ಧತೆ ನಡೆದಿದೆ.

ಸರ್ಕಾರ ರಚನೆಗೆ ಡಿಕೆ ಹಕ್ಕು ಮಂಡನೆ:

ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ಜತೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷಕ್ಕೆ ಬಹುಮತ ಇರುವುದರಿಂದ ರಾಜ್ಯಪಾಲರು ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಆಗಿ ನೇಮಕ ಮಾಡಲಿದ್ದಾರೆ. ಬಳಿಕ ನಿಗದಿತ ದಿನ ನೂತನ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲ ಸದಸ್ಯರಿಗೆ ರಾಜ್ಯಪಾಲರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸುರ್ಜೇವಾಲಾ ಭಾಗಿ:

ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್‌ ಪ್ರತಿನಿಧಿಯಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಭಾಗವಹಿಸಲಿದ್ದಾರೆ.