ಆತ್ಮ ನಿರ್ಭರ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಸಿಗದ ಮಾಹಿತಿ

| Published : Jul 16 2024, 12:39 AM IST / Updated: Jul 16 2024, 04:50 AM IST

ಆತ್ಮ ನಿರ್ಭರ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಸಿಗದ ಮಾಹಿತಿ
Share this Article
  • FB
  • TW
  • Linkdin
  • Email

ಸಾರಾಂಶ

ಆತ್ಮ ನಿರ್ಭರದ ಬಗ್ಗೆ ಬೀದಿ ಬದಿ ವ್ಯಾಪಾರಿಗೆ ಮಾಹಿತಿಗಳೇ ಲಭ್ಯವಿಲ್ಲದಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಸಂಬಂಧ ಅರಿವು ಮೂಡಿಸುವ ಕಾರ್ಯಗಳನ್ನು ಚುರುಕುಗೊಳಿಸುವಂತೆ ತಾಕೀತು ಮಾಡಿದರು.

 ಚಿತ್ರದುರ್ಗ : ಆತ್ಮ ನಿರ್ಭರದ ಬಗ್ಗೆ ಬೀದಿ ಬದಿ ವ್ಯಾಪಾರಿಗೆ ಮಾಹಿತಿಗಳೇ ಲಭ್ಯವಿಲ್ಲದಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಸಂಬಂಧ ಅರಿವು ಮೂಡಿಸುವ ಕಾರ್ಯಗಳನ್ನು ಚುರುಕುಗೊಳಿಸುವಂತೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಸ್ಥರಿಗಾಗಿಯೇ ಪಿಎಂ ಸ್ವನಿಧಿ ಕಿರು ಸಾಲ ಸೌಲಭ್ಯ ಯೋಜನೆ ಜಾರಿ ಮಾಡಲಾಗಿದೆ. ಯೋಜನೆಯಡಿ ಮೂರು ಹಂತಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲಾಗುತ್ತಿದೆ. ಆದರೆ, ಮೊದಲ ಹಂತದಲ್ಲಿ ರು.10,000 ಸಾಲ ಪಡೆದವರು, ಸಾಲ ಮರುಪಾವತಿ ಮಾಡದೇ, ಎರಡು ಹಾಗೂ ಮೂರನೇ ಹಂತದ ಸಾಲ ಪಡೆಯಲು ಅನರ್ಹರಾಗುತ್ತಿದ್ದಾರೆ. ಹೀಗಾಗಿ ಮೊದಲ ಹಂತದಲ್ಲಿ ಸಾಲ ಪಡೆದವರು, ಕಾಲಕ್ಕೆ ಸರಿಯಾಗಿ ಮರುಪಾವತಿಸಿದಲ್ಲಿ, ಅಂತಹವರಿಗೆ ಎರಡು ಹಾಗೂ ಮೂರನೆ ಹಂತದಲ್ಲಿ ನೀಡಲಾಗುವ ಸಾಲಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಸಮರ್ಪಕವಾಗಿ ಅರಿವು ಮೂಡಿಸಬೇಕು ಎಂದರು.

ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ಯೋಜನೆಯಡಿ ಪಿಎಂ ಸ್ವನಿಧಿ ಸಾಲ ಪಡೆದ ಫಲಾನುಭವಿಗಳ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈ ಕುಟುಂಬಗಳಿಗೆ ಸ್ವನಿಧಿ ಸಮೃದ್ಧ್ ಯೋಜನೆಯಡಿ, ಪ್ರಧಾನಮಂತ್ರಿ ಸುರಕ್ಷಾ ಬೀಮಾ, ಜೀವನ್ ಜ್ಯೋತಿ ಬೀಮಾ, ಶ್ರಮಯೋಗಿ ಮನ್ ಧನ್ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾರ್ಡ್, ಜನಧನ್, ಜನನಿ ಸುರಕ್ಷಾ, ಮಾತೃ ವಂದನಾ ಹಾಗೂ ಲೇಬರ್ ಕಾರ್ಡ್ ಹಣಕಾಸು ಸೌಲಭ್ಯಗಳನ್ನು ನೀಡಲಾಗುವುದು. ಆದರೆ, ಬೀದಿ ವ್ಯಾಪಾರಿಗಳಿಗೆ ಈ ಎಲ್ಲ ಯೋಜನೆಗಳ ಕುರಿತು ಮಾಹಿತಿ ಇಲ್ಲ. ಈ ಕುರಿತು ಜಾಗೃತಿ ಹಾಗೂ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ ನೊಂದಣಿಯಾದವರ ವೈಯಕ್ತಿಕ ವಿವರ, ಇದುವರೆಗೂ ತರಬೇತಿ ಪಡೆದವರ ಸಂಖ್ಯೆ ಎಷ್ಟು? ಜಿಲ್ಲೆಯ ಯಾವ ಯಾವ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯಿಂದ ಸಂಗ್ರಹಿಸಬೇಕು. ಕೇವಲ ದಾಖಲೆಗಳಲ್ಲಿ ತರಬೇತಿ ನೀಡಿದರೆ ಪ್ರಯೋಜನವಾಗದು. ತರಬೇತಿ ನೀಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 26,366 ಜನರು 18 ಬಗೆಯ ವಿವಿಧ ವೃತ್ತಿಗಳ ತರಬೇತಿ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 11,899 ಜನರಿಗೆ ಈಗಾಗಲೆ ತರಬೇತಿ ನೀಡಲಾಗಿದೆ. 14,467 ಜನರಿಗೆ ತರಬೇತಿ ನೀಡುವುದು ಬಾಕಿಯಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ ಮಾಹಿತಿ ನೀಡಿದರು.

ಕಲಿಕೆ ಜೊತೆ ಕೌಶಲ್ಯ ಯೋಜನೆಯಡಿ ಜಿಲ್ಲೆಯ 9 ಪ್ರಥಮ ದರ್ಜೆ ಕಾಲೇಜುಗಳಲ್ಲಿ 6 ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ತರಬೇತಿಗಳನ್ನು ನೀಡಲಾಗುತ್ತಿದೆ. ಡಿಜಿಟಲ್ ಮಾರ್ಕೆಟಿಂಗ್, ಅನಿಮೇಷನ್, ಕಂಟೆಂಟ್ ಮತ್ತು ಕಮ್ಯುನಿಕೇಷನ್, ಡಾಟಾ ಸೈನ್ಸ್ ಮತ್ತು ವಿಷುವಲೈಜೇಷನ್, ಮಿಡಿಯಾ ಮತ್ತು ಫೀಲಂ ಮೇಕಿಂಗ್, ಸಪ್ಲೈ ಚೈನ್ ಮ್ಯಾನೇಜೆಮೆಂಟ್ ವಿಷಯಗಳ ಕುರಿತು ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಸಂಯೋಜನೆ ಹೊಂದಿದ ಕ್ಲೌಡ್ ದಟ್, ಇನೋವೆಟೀವ್ ಫಿಲಂ ಅಕಾಡೆಮಿ, ಅನಿಮೇಷನ್ ಸಂಸ್ಥೆಗಳು ತರಬೇತಿ ನೀಡುತ್ತಿವೆ ಎಂದು ವೇಮಣ್ಣ ತಿಳಿಸಿದರು.

ಜಿಲ್ಲೆಯ ಕೈಗಾರಿಕಾ ಬೇಡಿಕೆ ಸಮೀಕ್ಷೆ ಮಾಹಿತಿ ಆಧರಿಸಿ, ಸರ್ಕಾರಿ ಹಾಗೂ ಖಾಸಗಿ ಐಟಿಐ ಮತ್ತು ಜಿ.ಟಿ.ಟಿ.ಸಿ ಗಳಲ್ಲಿ ನೂತನವಾದ ಕೋರ್ಸುಗಳನ್ನು ಆರಂಭಿಸಲು ಪ್ರಸ್ತಾವನೆ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಡೇ ನಲ್ಮ್ ಯೋಜನೆ ಅನುಷ್ಠಾನದಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪೌರಾಯುಕ್ತರಿಗೆ ಸೂಚಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಿ.ಆನಂದ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ವಿವಿಧ ನಗರಸಭೆಗಳ ಪೌರಾಯುಕ್ತರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.