ಹಲವು ಎಚ್ಚರಿಕೆಯ ನಡುವೆಯೂ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅವರಿಗೆ ನೋಟಿಸ್‌ ನೀಡಲಾಗುವುದು

ಬೆಂಗಳೂರು : ಹಲವು ಎಚ್ಚರಿಕೆಯ ನಡುವೆಯೂ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅವರಿಗೆ ನೋಟಿಸ್‌ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ವರ್ಷಾಂತ್ಯಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಸವರಾಜು ವಿ.ಶಿವಗಂಗಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ ಅಧಿಕಾರ ಸೇರಿ ಪಕ್ಷದ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಬಾರದು ಎಂದು ಈಗಾಗಲೇ ಹಲವು ಬಾರಿ ಸೂಚಿಸಲಾಗಿದೆ. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು, ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆ ನೀಡುವ ಮೂಲಕ ಗೊಂದಲ ಮೂಡಿಸಬಾರದು ಎಂದು ಹಿಂದೆಯೇ ತಿಳಿಸಲಾಗಿದೆ. ಆದರೂ, ಬಸವರಾಜು ಶಿವಗಂಗಾ ಅವರು ಮತ್ತೆ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಅವರಿಗೆ ನೋಟಿಸ್‌ ನೀಡಲಾಗುವುದು ಎಂದು ಹೇಳಿದ್ದಾರೆ.