ಸಾರಾಂಶ
ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ.
ವಿಜಯಪುರ: ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ. ಪಂಚ ಗ್ಯಾರಂಟಿಗಳಲ್ಲಿ ಸಿದ್ದರಾಮಯ್ಯ ಕುರ್ಚಿ ಹೋಗೋದು ಒಂದು ಗ್ಯಾರಂಟಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಹೋದರೆ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ. ಡಿ.ಕೆ.ಶಿವಕುಮಾರ್ ಈಗಲೇ ತನ್ನ ಪರವಾಗಿರುವ ಲೋಕಸಭಾ ಸದಸ್ಯರ ಆಯ್ಕೆಗೆ ಸ್ಕೆಚ್ ಹಾಕಿದ್ದು, ಚುನಾವಣೆ ಮುಗಿದ ಬಳಿಕ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಇದೇ ಕಾರಣಕ್ಕೆ ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೇ ಎನ್ನುವ ಸಂದೇಶ ಕೊಟ್ಟಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಪರವಾಗಿರುವ ಅಭ್ಯರ್ಥಿಗಳನ್ನು ಸೋಲಿಸದಿದ್ದರೆ ಚುನಾವಣೆ ಬಳಿಕ ಕಾಂಗ್ರೆಸ್ ಒಡೆದು ಮುಂದೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ. ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡದೇ ಹೋದರೆ ಅವರ ಕುರ್ಚಿ ಹೋಗೋದು ಗ್ಯಾರಂಟಿ ಎಂದರು.