ಶಾಶ್ವತ ನೀರಾವರಿ, ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಡಾ.ಕೆ.ಸುಧಾಕರ್‌ ಭರವಸೆ

| Published : Mar 31 2024, 02:01 AM IST / Updated: Mar 31 2024, 06:16 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್‌ ಸಮ್ಮಾನ್‌ನಡಿ ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ.

 ಚಿಕ್ಕಬಳ್ಳಾಪುರ :  ತಾವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ, ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಶ್ರಮಿಸುವುದಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಭರವಸೆ ನೀಡಿದರು. ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ಚುನಾವಣಾ ಉಸ್ತುವಾರಿ ರಾಧಾಮೋಹನ್‌ ಅಗರ್ವಾಲ್‌ ಜತೆ ಭಾಗವಹಿಸಿ ಪ್ರಮುಖರು, ಸಹ-ಪ್ರಮುಖರು ಹಾಗೂ ಕಾರ್ಯಕರ್ತರ ಸಭೆಗಳ ನಂತರ ಚಿಕ್ಕಬಳ್ಳಾಪುರ ನಗರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮೊಯ್ಲಿ ಭರವಸೆಗೆ 15 ವರ್ಷ

ತಾವು ಕೊಟ್ಟ ಮಾತು, ಇಟ್ಟ ಹೆಜ್ಜೆ ಎಂದಿಗೂ ತಪ್ಪಿಲ್ಲ. ನನ್ನ ಕರ್ಮಭೂಮಿ ಇದೇ ಆಗಿರುವುದರಿಂದ ಇಲ್ಲಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಸಂಸದನಾದ ಬಳಿಕ ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ತರುತ್ತೇನೆ. ಇಲ್ಲಿ ಹಿಂದೆ ಸಂಸದರಾಗಿದ್ದ ವೀರಪ್ಪ ಮೊಯ್ಲಿ ನೀರು ತರುತ್ತೇನೆ ಎಂದು ಹದಿನೈದು ವರ್ಷದ ಹಿಂದೆ ಹೇಳಿದ್ದರು. ಹಿಂದಿನ ಬಿಜೆಪಿ ಸರ್ಕಾರ ಎತ್ತಿನಹೊಳೆ ಯೋಜನೆಗೆ 4 ಸಾವಿರ ಕೋಟಿ ರೂ. ನೀಡಿತ್ತು ಎಂದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್‌ ಸಮ್ಮಾನ್‌ನಡಿ ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಬಿಜೆಪಿ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು ಸಹ ರಾಜ್ಯ ಕಾಂಗ್ರೆಸ್‌ ಕಿತ್ತುಕೊಂಡಿದೆ ಎಂದು ದೂರಿದರು. ಹಾಲಿನ ಪ್ರೋತ್ಸಾಹಧನ ನೀಡುತ್ತಿಲ್ಲ

ಹಿಂದಿನ ಬಿಜೆಪಿ ಸರ್ಕಾರದಿಂದ ರೈತರಿಗೆ 5 ರೂ. ಹಾಲು ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಎಂಟು ತಿಂಗಳಿಂದ ಈ ಪ್ರೋತ್ಸಾಹಧನ ಸಿಗುತ್ತಿಲ್ಲ. ಅಲ್ಲದೆ ಅದರಲ್ಲಿ ಒಂದು ರುಪಾಯಿ ಇಳಿಸಿದ್ದಾರೆ. ಬೇಸಿಗೆಯಲ್ಲಿ ಹಾಲು ಉತ್ಪಾದಿಸುವುದು ಕಷ್ಟದ ಕೆಲಸ. ನಾನು ಶಾಸಕನಾಗಿದ್ದಾಗ ಕೆರೆಗಳಿಗೆ ನೀರು ತುಂಬಿಸಿದ್ದೆ, ತಾಲೂಕು ಆಸ್ಪತ್ರೆ ನೀಡಿದ್ದೆ. ಆಯುಷ್ಮಾನ್‌ ಭಾರತ್‌ ಮೂಲಕ ಜನರಿಗೆ ತಲಾ 5 ಲಕ್ಷ ರೂ. ಆರೋಗ್ಯ ವಿಮೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ.

 ಹಿಂದುಳಿದ ವರ್ಗದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತನಾಡುತ್ತಾರೆ. ಆದರೆ ಪ್ರಧಾನಿ ಮೋದಿ ಅವರಂತಹ ಹಿಂದುಳಿದ ನಾಯಕ ಬೇರೊಬ್ಬರಿಲ್ಲ. ಆದರೂ ಅವರು ಎಲ್ಲಿಯೂ ಹಾಗೆ ಹೇಳಿಕೊಳ್ಳುವುದಿಲ್ಲ ಎಂದರು. ಪ್ರಧಾನಿ ಮೋದಿ ಗ್ಯಾರಂಟಿದೇಶದ ಭವಿಷ್ಯ ರೂಪಿಸುವ, ಮಕ್ಕಳ ಬದುಕನ್ನು ಬಂಗಾರ ಮಾಡುವ, ಮಹಿಳಾ ಸಬಲೀಕರಣ ಮಾಡುವ ಗ್ಯಾರಂಟಿಯೇ ಮೋದಿ ಗ್ಯಾರಂಟಿ. ತಾತ್ಕಾಲಿಕ ಅನುಕೂಲಕ್ಕಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಕಾಂಗ್ರೆಸ್‌ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಇಂತಹ ಪಕ್ಷ ರಾಜ್ಯಕ್ಕೆ ಬೇಡ ಎಂದರು.ಈ ಚುನಾವಣೆ ಸಾಮಾನ್ಯ ಎಂದು ಭಾವಿಸಬಾರದು. ಇದು ಶಾಶ್ವತವಾದ ಮೋದಿ ಗ್ಯಾರಂಟಿ ನೀಡುವ ಚುನಾವಣೆ. ಕೇಂದ್ರ ಸರ್ಕಾರದ ಅನುದಾನಗಳು ಯಾವುದೇ ಏಜೆಂಟ್‌ ಇಲ್ಲದೆ ನೇರವಾಗಿ ಫಲಾನುಭವಿಯ ಖಾತೆಗೆ ಬರುತ್ತಿದೆ. ಇಂತಹ ಪಾರದರ್ಶಕ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದರು.

ಅಗರ್ವಾಲ್‌ಗೆ ಸನ್ಮಾನ

ಈ ವೇಳೆ ಚುನಾವಣಾ ಉಸ್ತುವಾರಿ ರಾಧಾಮೋಹನ್‌ ಅಗರ್ವಾಲ್‌ರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿ ರಾಧಾಮೋಹನ್‌ ಅಗರ್ವಾಲ್‌,ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು, ಜಿಲ್ಲಾಧ್ಯಕ್ಷ ಶ್ರೀ ರಾಮಲಿಂಗಪ್ಪ,ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ,ನಾಗರಾಜ್,ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಜೆಡಿಎಸ್ ಮುಖಂಡ ನರಸಿಂಹಮೂರ್ತಿ ,ಬಿಜೆಪಿ ಮುಖಂಡರಾದ ರವಿನಾರಾಯಣರೆಡ್ಡಿ, ಅನುಆನಂದ್, ಮುರಳೀಧರ್, ಬಾಲು,ಮಧುಚಂದ್ರ,ಮತ್ತಿತರ ಮುಖಂಡರು, ಕಾರ್ಯಕರ್ತರು ಇದ್ದರು.