ಬಹುವರ್ಷಗಳ ಬೇಡಿಕೆಯಂತೆ ರಾಮನಗರಕ್ಕೆ ಬಿಎಂಟಿಸಿ ಬಸ್ ಸಂಚಾರವನ್ನು ವಿಸ್ತರಣೆ ಮಾಡಲಾಗಿದ್ದು, ಅದರಂತೆ ಮೊದಲ ಹಂತದಲ್ಲಿ ಬೆಂಗಳೂರು ನಗರದಿಂದ ರಾಮನಗರ ಹಾಗೂ ಕನಕಪುರಕ್ಕೆ‘ವಜ್ರ ವಿಸ್ತಾರ’ ಬಿಎಂಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ರಾಮನಗರ : ಬಹುವರ್ಷಗಳ ಬೇಡಿಕೆಯಂತೆ ರಾಮನಗರಕ್ಕೆ ಬಿಎಂಟಿಸಿ ಬಸ್ ಸಂಚಾರವನ್ನು ವಿಸ್ತರಣೆ ಮಾಡಲಾಗಿದ್ದು, ಅದರಂತೆ ಮೊದಲ ಹಂತದಲ್ಲಿ ಬೆಂಗಳೂರು ನಗರದಿಂದ ರಾಮನಗರ ಹಾಗೂ ಕನಕಪುರಕ್ಕೆ‘ವಜ್ರ ವಿಸ್ತಾರ’ ಬಿಎಂಟಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಕೆಂಪೇಗೌಡ ಬಸ್ ನಿಲ್ದಾಣ-ರಾಮನಗರ ಮತ್ತು ಬನಶಂಕರಿ-ಕನಕಪುರಕ್ಕೆ ‘ವಜ್ರ ವಿಸ್ತಾರ’ ನೂತನ ಹವಾನಿಯಂತ್ರಿತ ಮಾರ್ಗಗಳ ಬಸ್ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀವರೆಗೆ ಇದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕಾರ್ಯಾಚರಣೆ ವ್ಯಾಪ್ತಿಯನ್ನು ರಾಜ್ಯ ಸರ್ಕಾರವು ಸಾರ್ವಜನಿಕರ ಹಿತದೃಷ್ಠಿಯಿಂದ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಿಂದ 40 ಕಿ.ಮೀವರೆಗೆ ವಿಸ್ತರಿಸಲಾಗಿದೆ ಎಂದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಅವಶ್ಯಕವಿರುವ ಬಸ್ಗಳ ಮಾರ್ಗದ ಪಟ್ಟಿ ನೀಡಿದರೆ ಶಾಲಾ ಸಮಯಗಳಲ್ಲಿ ಹೆಚ್ಚುವರಿ ಬಸ್ಗಳ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ರಾಮನಗರ ಹಾಗೂ ಹಾರೋಹಳ್ಳಿ ಬಸ್ ನಿಲ್ದಾಣ ಕಾಮಗಾರಿಗೆ ಅವಶ್ಯವಿರುವ ಜಾಗಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸಿದರೆ ಶೀಘ್ರವಾಗಿ ಬಸ್ ನಿಲ್ದಾಣಗಳ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಪ್ರಮುಖ ಪಟ್ಟಣಗಳಿಗೆ ವೇಗದೂತ:
ಬೆಂಗಳೂರು ನಗರದ ಸುತ್ತಮುತ್ತಲಿರುವ ಪ್ರಮುಖ ಪಟ್ಟಣ ಪ್ರದೇಶಗಳಾದ ಅತ್ತಿಬೆಲೆ, ಆನೇಕಲ್, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ದಾಬಸಪೇಟೆ, ಬಿಡದಿ, ಹಾರೋಹಳ್ಳಿ ಹಾಗೂ ಹೊಸಕೋಟೆಗೆ ಒಟ್ಟು 11 ಮಾರ್ಗಗಳಲ್ಲಿ 124 ಅನುಸೂಚಿಗಳನ್ನು ವೇಗದೂತ ತಡೆ ರಹಿತವಾಗಿ ಸಂಚರಿಸುತ್ತಿದ್ದು, ಪ್ರತಿದಿನ ಸರಾಸರಿ 60 ಸಾವಿರ ಪ್ರಯಾಣಿಕರು, ಈ ಸಾರಿಗೆ ಸೌಲಭ್ಯ ಪಡೆಯುತ್ತಿದ್ದು, ಪ್ರತಿದಿನ ಸರಾಸರಿ ₹18 ಲಕ್ಷ ಸಾರಿಗೆ ಆದಾಯ ಬರುತ್ತಿದೆ ಎಂದರು.
ಶಕ್ತಿ ಯೋಜನೆಯಡಿ 690 ಕೋಟಿ ಪ್ರಯಾಣ
ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರು 690 ಕೋಟಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರು ವ್ಯಾಪ್ತಿಯಲ್ಲಿ 217 ಕೋಟಿ ಪ್ರಯೋಜನ ಪಡೆದಿದ್ದಾರೆ. ಇದರಿಂದಾಗಿ ಬೆಂಗಳೂರು ನಗರದಲ್ಲಿ ಶೇ.23ರಷ್ಟು ಹಾಗೂ ಹುಬ್ಬಳ್ಳಿಯಲ್ಲಿ ಶೇ.21ರಷ್ಟು ಉದ್ಯೋಗ ಸೃಷ್ಠಿಗೊಂಡಿದೆ ಎಂದು ಸಾರಿಗೆ ಸಚಿವರು ತಿಳಿಸಿದರು.
ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಎಂ. ನಿಕೇತ್ ರಾಜ್ ಮಾತನಾಡಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಆರಾಧ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ರಾಜು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಟರಾಜು ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ನಗರಸಭೆ ಅಧ್ಯಕ್ಷರಾದ ಶೇಷಾದ್ರಿ (ಶಶಿ), ರಾಮನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿ.ಎಚ್. ರಾಜು, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಸಂಸ್ಥೆಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
