ಬಿಜೆಪಿ ಹಾಗೂ ಜನತಾದಳದ ಸಾಕಷ್ಟು ನಾಯಕರು ನನ್ನೊಂದಿಗೆ, ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ, ನಂಬಿಕೆ ಇಟ್ಟು ಬರುವವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು : ಬಿಜೆಪಿ ಹಾಗೂ ಜನತಾದಳದ ಸಾಕಷ್ಟು ನಾಯಕರು ನನ್ನೊಂದಿಗೆ, ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ, ನಂಬಿಕೆ ಇಟ್ಟು ಬರುವವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಎರಡೂ ಪಕ್ಷಗಳ ಸಾಕಷ್ಟು ನಾಯಕರು ನನ್ನ ಮತ್ತು ಅಧ್ಯಕ್ಷರ ಜೊತೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮೆಲ್ಲರ ಬಗ್ಗೆ ನಂಬಿಕೆವುಳ್ಳವರ ಪಟ್ಟಿ ತಯಾರಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಪಕ್ಷಕ್ಕೆ ಬರುವವರಿಗೆ ಮುಂದೆ ಅವಕಾಶ ಮಾಡಿಕೊಡಲಾಗುವುದು. ಈಗಾಗಲೇ ಪಕ್ಷಕ್ಕೆ ಬಂದಿರುವವರಿಗೆ ವಿವಿಧ ಸ್ಥಾನಗಳಲ್ಲಿ ಅವಕಾಶ ನೀಡಲಾಗಿರುವುದು ತಿಳಿದ ವಿಷಯ. ಯಾರೇ ಬಂದರೂ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಜನರ ಮಧ್ಯೆ ನಾಯಕನಿದ್ದರೆ ಜನ ಜಾತಿ ಕೇಳಲ್ಲ:
‘ಮಾಜಿ ಮೇಯರ್ ನಾಗರಾಜ್ ಅವರಿಗೆ, ಕೆ.ಎಂ.ನಾಗರಾಜ್ ಅವರಿಗೆ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಟಿಕೆಟ್ ನೀಡಲು ತೀರ್ಮಾನಿಸಲಾಯಿತು. ಆಗ ನಾವು ನರೇಂದ್ರ ಬಾಬು ಹಾಗೂ ಚಂದ್ರಶೇಖರ್ ಅವರಿಗೆ ನೀಡೋಣ ಎಂದು ಎಸ್.ಎಂ.ಕೃಷ್ಣ ಅವರಿಗೆ ಹೇಳಿದೆವು. ಆಗ ಅನೇಕರು ಎರಡೂ ಕ್ಷೇತ್ರಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಅಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗದವರು ಗೆಲ್ಲಲು ಸಾಧ್ಯವೇ ಎಂದು ಕೇಳಿದರು. ಆದರೆ ಇವರಿಬ್ಬರೂ ಗೆದ್ದರು. ಜನರ ನಡುವೆ ಇದ್ದರೆ ಜನ ಜಾತಿ ಕೇಳಲ್ಲ. ನಾಯಕ ಕ್ರಿಯಾಶೀಲರಾಗಿದ್ದರೆ ಜನ ಗೆಲ್ಲಿಸುತ್ತಾರೆ. ಜನ ಜಾತಿ ನೋಡುವ ಹಾಗಿದ್ದರೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ಹೇಗೆ ಸಾಧ್ಯ? ಸಿಂಧ್ಯಾ ಅವರು ನನ್ನ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿದ್ದರು. ಅಲ್ಲಿ ಮರಾಠಿ ಮತದಾರರ ಸಂಖ್ಯೆ 3 ಸಾವಿರವೂ ದಾಟಿಲ್ಲ. ರಾಮನಗರದಲ್ಲಿ ನಿಖಿಲ್ ಎದುರು ಇಕ್ಬಾಲ್ ಹುಸೇನ್ ಗೆಲ್ಲಲು ಹೇಗೆ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನೆ.ಲ.ನರೇಂದ್ರ ಬಾಬು ಮತ್ತು ಅವರ ಬೆಂಬಲಿಗರನ್ನು ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
ಹಳಬರು ಹೊಸಬರೆಂಬ ಭೇದವಿಲ್ಲ:
ಕಾಂಗ್ರೆಸ್ ಪಕ್ಷದಲ್ಲಿ ಹಳಬರು ಹೊಸಬರು ಎನ್ನುವ ಭೇದವಿಲ್ಲ. ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ನಲ್ಲಿ ಸೋತರೂ ಎಂಎಲ್ಸಿ ಮಾಡಲಾಯಿತು. ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಾಯಿತು. ಎಷ್ಟೋ ಜನ ದಳದಲ್ಲಿ ಇದ್ದವರಿಗೂ ಅವಕಾಶ ನೀಡಿದ್ದೇವೆ. ಇದರಿಂದ ನಮ್ಮ ಪಕ್ಷದವರಿಗೆ ತೊಂದರೆಯಾಗಿದೆ. ಏಕೆಂದರೆ ನಮ್ಮನ್ನು ನಂಬಿದವರಿಗೆ, ದುಡಿಯುವವರಿಗೆ ಅವಕಾಶ ನೀಡಬೇಕು. ಬಿಜೆಪಿಗೆ ಹೋದರೆ ಅಲ್ಲಿ ಬದುಕಲು ಆಗುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಬೇರೆಯವರು ಬಂದು ಬದುಕಬಹುದು ಎಂದರು.


