ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆಂದು ರಾಜಣ್ಣ ಅವರಿಗೆ ಯಾರು ಹೇಳಿದ್ದು? ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿಯೇ ಇರಲಿದ್ದಾರೆ. ಅವರು ರಾಜೀನಾಮೆ ನೀಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ವಸತಿ ಸಚಿವ ಜಮೀರ್‌ ಅಹ್ಮದ್‌ ತಿರುಗೇಟು ನೀಡಿದ್ದಾರೆ.

ಹೈಕಮಾಂಡ್‌ ಹೇಳಿದರೆ ಸಿದ್ದರಾಮಯ್ಯ ಅವರು ಅಧಿಕಾರ ತ್ಯಜಿಸಲು ಸಿದ್ಧ ಎಂಬ ರಾಜಣ್ಣ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿ, ‘ಮುಖ್ಯಮಂತ್ರಿ ಸ್ಥಾನ ಎಂದರೆ ಏನು? ಯಾರೂ ರಾಜೀನಾಮೆ ನೀಡುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮೇ 4ರ ನಂತರ ಎಲ್ಲವೂ ಒಳ್ಳೆಯದಾಗಲಿದೆ’ ಎಂದು ಸ್ಪಷ್ಟಪಡಿಸಿದರು.

ರಾಜಣ್ಣ ಹೇಳಿಕೆಗೆ ತಿರುಗೇಟು

ರಾಹುಲ್‌ ಗಾಂಧಿ ಸೂಚನೆ ನೀಡಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿರುವ ಜಮೀರ್‌ ಅಹಮದ್‌ ಖಾನ್‌, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ರಾಜಣ್ಣ ಅವರಿಗೆ ಹೇಳಿದ್ದು ಯಾರು? ಸಿದ್ದರಾಮಯ್ಯ ಅವರು ಹೇಳಿದ್ದಾರಾ? ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ, ಅವರೇ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.


ಸಭಾಪತಿ ಭೇಟಿಯಾದ ಜಮೀರ್‌:

ಮಾಧ್ಯಮಗಳಿಗೆ ಪ್ರತಿಕ್ರಿಯಿಸುವುದಕ್ಕೂ ಮುನ್ನ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಜಮೀರ್‌ ಅಹಮದ್‌ ಖಾನ್‌ ಅವರು ಭೇಟಿ ನೀಡಿದರು. ಈ ವೇಳೆ ವಿಧಾನಪರಿಷತ್‌ ಸದಸ್ಯರಾದ ಅಬ್ದುಲ್‌ ಜಬ್ಬಾರ್‌ ಮತ್ತು ನಸೀರ್‌ ಅಹ್ಮದ್‌ ವಿಚಾರವಾಗಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಹೊರಟ್ಟಿ ಭೇಟಿ ಕುರಿತು ಮಾತನಾಡಿದ ಜಮೀರ್‌ ಅಹಮದ್‌ ಖಾನ್‌, ನಾನು ಮತ್ತು ಹೊರಟ್ಟಿ ಅವರು ಸ್ನೇಹಿತರು. ಅವರು ಬೆಂಗಳೂರಿನಲ್ಲಿದ್ದಾಗ ಕರೆ ಮಾಡುತ್ತಾರೆ. ಅದಕ್ಕಾಗಿ ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.