ಸಾರಾಂಶ
ಬೆಂಗಳೂರು : ಸಂಸದೆಯಾಗಿ ಹಸಿರು ಬೆಂಗಳೂರು ದಕ್ಷಿಣ ಮಾಡುವ ಗುರಿ ಹೊಂದಿದ್ದೇನೆ. ಅದಕ್ಕಾಗಿ ಜನರ ಬೆಂಬಲ ಅಗತ್ಯವಿದ್ದು, ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನ ಪರವಾಗಿ ಮತ ಚಲಾಯಿಸುವ ವಿಶ್ವಾಸವಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹೇಳಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್ಗಳಿಗೆ ಭೇಟಿ ನೀಡಿ ಶನಿವಾರ ಮತಯಾಚನೆ ನಡೆಸಿ ಮಾತನಾಡಿದ ಸೌಮ್ಯಾ ರೆಡ್ಡಿ ಸಂಸದೆಯಾದ ನಂತರ ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಹಮ್ಮಿಕೊಳ್ಳುವ ಯೋಜನೆಗಳ ಕುರಿತಂತೆ ವಿವರಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯನ್ನು ಬಯಸಿದ್ದಾರೆ. ಜನರು ಕಾಂಗ್ರೆಸ್ಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ನಾನು ಸಂಸದೆಯಾಗಿ ಆಯ್ಕೆಯಾದರೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಯಾವೆಲ್ಲ ಯೋಜನೆ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ಈಗಲೇ ಗುರಿಯನ್ನು ಹಾಕಿಕೊಂಡಿದ್ದೇನೆ. ಸಂಸದೆಯಾದರೆ ಬೆಂಗಳೂರಿನ ಉದ್ಯಾನನಗರಿ ಹೆಸರು ಇನ್ನಷ್ಟು ಗಟ್ಟಿಗೊಳ್ಳುವಂತೆ ಮಾಡುವ ಉದ್ದೇಶ ಹೊಂದಿದ್ದೇನೆ. ಹಸಿರು ಬೆಂಗಳೂರು ದಕ್ಷಿಣವನ್ನು ರೂಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಉದ್ಯಾನಗಳನ್ನು ಹೆಚ್ಚಿಸಿ, ಮರಗಳ ಸಂಖ್ಯೆ ಹೆಚ್ಚಾಗುವಂತೆ ಮಾಡುತ್ತೇನೆ ಎಂದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಎಲ್ಲ ವರ್ಗದ ಮತದಾರರು ಬದಲಾವಣೆ ಬಯಸಿದ್ದಾರೆ. ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದಂತಹ ಅಭ್ಯರ್ಥಿಗೆ ಮತ ಚಲಾಯಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಜಯನಗರ ಶಾಸಕಿಯಾಗಿದ್ದಾಗ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು, ಜನರ ಸಂಕಷ್ಟಕ್ಕೆ ಸ್ಪಂದಿಸಿದ ರೀತಿಯನ್ನು ಈಗಲೂ ಜನರು ಮೆಚ್ಚಿಕೊಂಡು ಸ್ಮರಿಸುತ್ತಾರೆ.
ಪ್ರಚಾರಕ್ಕೆ ಹೋದಾಗ ಜಯನಗರ ಮಾತ್ರವಲ್ಲದೆ ಬೇರೆ ಕ್ಷೇತ್ರದ ಮತದಾರರೂ ಆ ಬಗ್ಗೆ ಹೇಳುತ್ತಾರೆ. ಶಾಸಕಿಯಾಗಿದ್ದಾಗ ಪ್ರತಿ ಪರೀಕ್ಷಾ ಸಮಯದಲ್ಲಿ ಉಚಿತ ಕೋಚಿಂಗ್ ತರಗತಿಗಳನ್ನು ನಡೆಸಿದ್ದೇನೆ. 2 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಿದ್ದೇನೆ. ಲೋಕಸಭಾ ಸದಸ್ಯೆಯಾಗಿಯೂ ಅದೇ ರೀತಿ ಕೆಲಸ ಮಾಡುವ ಗುರಿ ಹೊಂದಿದ್ದೇನೆ. ಅದಕ್ಕಾಗಿ ಈ ಬಾರಿ ಜನರ ಆಶೀರ್ವಾದ ನನಗೆ ದೊರೆಯುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
27 ಅಪಾರ್ಟ್ಮೆಂಟ್ ನಿವಾಸಿಗಳ ಜತೆ ಚರ್ಚೆ
ಜಯನಗರ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್ ವ್ಯಾಪ್ತಿಯ 27 ಅಪಾರ್ಟ್ಮೆಂಟ್ ನಿವಾಸಿಗಳ ಸಂಘಗಳೊಂದಿಗೆ ಸೌಮ್ಯಾ ರೆಡ್ಡಿ ಸಭೆ ನಡೆಸಿದರು. ಸಭೆ ವೇಳೆ ದಕ್ಷಿಣ ಲೋಕಸಭಾ ಕ್ಷೇತ್ರದ ಸಮಸ್ಯೆ ಹಾಗೂ ಅದಕ್ಕೆ ತಾವು ಕಂಡುಕೊಳ್ಳುವ ಪರಿಹಾರದ ಬಗ್ಗೆ ವಿವರಿಸಿದರು. ಅದಾದ ನಂತೆ ಗಾಣಿಗ, ಕಮ್ಮ ಸೇರಿದಂತೆ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿದರು.
ಸೌಮ್ಯಾ ಪರ ತೆಲಂಗಾಣ ಸಿಎಂ ರೇವಂತ್ ಪ್ರಚಾರ
ಸೌಮ್ಯಾ ರೆಡ್ಡಿ ಪರವಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಚಾರ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ ರೇವಂತ್ ರೆಡ್ಡಿ, ದಕ್ಷಿಣ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸೌಮ್ಯಾ ರೆಡ್ಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಉಮಾಪತಿ ಸೇರಿದಂತೆ ಇತರರಿದ್ದರು.