ಸಾರಾಂಶ
ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿ ಘೋಷಿಸಿದ ಬಳಿಕ ಬದಲಾವಣೆ ಪ್ರಶ್ನೆಯೇ ಇಲ್ಲ. ಹಿಂದೆಂದೂ ಪ್ರಕಟಿತ ಅಭ್ಯರ್ಥಿ ಬದಲಾಯಿಸಿದ ಉದಾಹರಣೆಗಳಿಲ್ಲ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜ್ ಗೌಡ ತಿಳಿಸಿದರು.
ಮೈಸೂರು : ಬಿಜೆಪಿಯಲ್ಲಿ ಒಮ್ಮೆ ಅಭ್ಯರ್ಥಿಯನ್ನು ಘೋಷಿಸಿದ ಬಳಿಕ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಹಿಂದೆಂದೂ ಪ್ರಕಟಿತ ಅಭ್ಯರ್ಥಿಯನ್ನು ಬದಲಾಯಿಸಿದ ಉದಾಹರಣೆಗಳಿಲ್ಲ. ಈ ವಿಚಾರದಲ್ಲಿ ಕೆಲವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿಯ ಘೋಷಿತ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜ್ ಗೌಡ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ನಾನು ಮೇ 16 ರಂದು ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್ ನಾಯಕರು ಕೂಡ ಅಂದು ನನ್ನ ಜೊತೆಯಲ್ಲಿ ಇರುತ್ತಾರೆಂಬ ವಿಶ್ವಾಸವಿದೆ. ಬಿಜೆಪಿ- ಜೆಡಿಎಸ್ ಮೈತ್ರಿಯಾದ ಬಳಿಕ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದರು.
ಮಂಡ್ಯದಲ್ಲಿ ಕುಮಾರಸ್ವಾಮಿ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದಿದ್ದಾರೆ. ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದಾಗ ಬಿಜೆಪಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂಬ ಕೂಗು ಎದ್ದಿತ್ತು. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿದೆ. ಈಗ ಜೆಡಿಎಸ್ ನಾಯಕರು ನಾವು ಸ್ಪರ್ಧೆ ಮಾಡುತ್ತೇವೆ ಎನ್ನುತ್ತಿರುವುದು ಅಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ನಾನು ಯಾವುದೇ ಕಾರಣಕ್ಕೂ ಚುನಾವಣೆ ಕಣದಿಂದ ಹಿಂದೆ ಸರಿಯುವುದಿಲ್ಲ. ನಾನು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಜೆಡಿಎಸ್ ನಾಯಕರೆಲ್ಲರೂ ಬರುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪೆನ್ ಡ್ರೈವ್ ಪರಿಣಾಮ ಬೀರಲಿದೆ
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪಕರಣ ವಿಧಾನ ಪರಿಷತ್ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಸುಶಿಕ್ಷಿತ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುತ್ತಾರೆ. ಈ ಹಿಂದೆ ನಡೆದಿರುವ ಚುನಾವಣೆ ವೇಳೆಯಲ್ಲೂ ಕೆಲ ಘಟನೆಗಳು ಚುನಾವಣೆ ಮೇಲೆ ಪರಿಣಾಮ ಬೀರಿವೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಪ್ರಕರಣವೂ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದರು.
ಸುಶಿಕ್ಷಿತ ಮತದಾರರು ಮತ ಚಲಾಯಿಸುವ ಮುನ್ನಾ ಸಾಕಷ್ಟು ಚಿಂತನೆ ಮಾಡುತ್ತಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 19 ಸಾವಿರ ಮತದಾರರು ಇದ್ದಾರೆ. ಈ ಪೈಕಿ ಹೆಚ್ಚಿನ ಮತದಾರರು ಬಿಜೆಪಿ ಪರವಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರದ ಜನಪರ ಯೋಜನೆಗಳನ್ನು ಸುಶಿಕ್ಷಿತ ಮತದಾರರು ಮೆಚ್ಚಿದ್ದಾರೆ. ಹೀಗಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗಿಂತ ಬಿಜೆಪಿಗೆ ಪೂರಕ ವಾತಾವರಣವಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುವುದೇ ಸೂಕ್ತವಾಗಿದೆ ಎಂದು ಅವರು ತಿಳಿಸಿದರು.