ನಾಳೆ ಬಿಜೆಪಿ ಸಭೆ: ಕರ್ನಾಟಕದ 20 ಸ್ಪರ್ಧಿಗಳ ಹೆಸರು ಫೈನಲ್‌ ಸಾಧ್ಯತೆ

| Published : Mar 09 2024, 01:30 AM IST / Updated: Mar 09 2024, 07:53 AM IST

ನಾಳೆ ಬಿಜೆಪಿ ಸಭೆ: ಕರ್ನಾಟಕದ 20 ಸ್ಪರ್ಧಿಗಳ ಹೆಸರು ಫೈನಲ್‌ ಸಾಧ್ಯತೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕದ 18ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬರುವ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕರ್ನಾಟಕದ 18ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬರುವ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ಭಾನುವಾರ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಸರತ್ತು ನಡೆಸಿದ್ದಾರೆ. 

ಆ ಕಸರತ್ತಿನ ಬಳಿಕ ಕೆಲವು ಕ್ಷೇತ್ರಗಳಿಗೆ ಒಂದು ಹೆಸರು, ಇನ್ನು ಕೆಲವು ಕ್ಷೇತ್ರಗಳಿಗೆ ಒಂದಕ್ಕಿಂತ ಹೆಚ್ಚು ಹೆಸರುಗಳ ಪಟ್ಟಿಯನ್ನು ಸಾಧಕ- ಬಾಧಕಗಳೊಂದಿಗೆ ವರಿಷ್ಠರಿಗೆ ನೀಡಲಾಗಿದೆ.

ಈ ಪಟ್ಟಿಯನ್ನು ಮುಂದಿಟ್ಟುಕೊಂಡು ಭಾನುವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರನ್ನು ಒಳಗೊಂಡ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. 

ಈಗಾಗಲೇ ಕಳೆದ ವಾರ ಪ್ರಕಟಿಸಿದ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. 

ಇದೀಗ ಭಾನುವಾರದ ಸಭೆಯ ಬಳಿಕ ಎರಡನೇ ಪಟ್ಟಿ ಅಂತಿಮಗೊಳಿಸಿ ಸೋಮವಾರ ಅಥವಾ ಮಂಗಳವಾರ ಬಿಡುಗಡೆ ಮಾಡುವ ಉದ್ದೇಶವಿದೆ.

ಇದರಲ್ಲಿ ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಗೊಂದಲವಿಲ್ಲದ ಅಥವಾ ಇತ್ಯರ್ಥಗೊಳ್ಳುವ 18ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಿತ್ರ ಪಕ್ಷ ಜೆಡಿಎಸ್‌ಗೆ ಮೂರರಿಂದ ನಾಲ್ಕು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದ್ದು, ಅಧಿಕೃತವಾಗಿ ಅಂತಿಮಗೊಂಡಿಲ್ಲ. 

ಈ ಸಂಬಂಧ ಮಾತುಕತೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. 

ಆ ಮಾತುಕತೆ ವಿಳಂಬವಾದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಬಗ್ಗೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಿಲ್ಲ. ಅಂಥ ನಾಲ್ಕೈದು ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಬಹುದು ಎನ್ನಲಾಗಿದೆ.

ಮೂರು ದಿನಗಳ ಕಾಲ ದೆಹಲಿಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಮತ್ತಿತರ ನಾಯಕರು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸಾಗಿದ್ದರು. ಮತ್ತೆ ಶನಿವಾರ ರಾತ್ರಿ ಅಥವಾ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳುವ ಸಾಧ್ಯತೆ ಹೆಚ್ಚಿದೆ.

2ನೇ ಪಟ್ಟಿಯಲ್ಲಿ ಘೋಷಣೆ ಆಗಬಹುದಾದ ಕ್ಷೇತ್ರಗಳು: ಶಿವಮೊಗ್ಗ, ಚಿಕ್ಕೋಡಿ, ದಾವಣಗೆರೆ, ಕಲಬುರಗಿ, ಬಳ್ಳಾರಿ, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ.

ಮಂಡ್ಯದಿಂದ ಯಾರು?
ಲೆಕ್ಕಾಚಾರ 1 ಜೆಡಿಎಸ್‌ಗೆ ಕ್ಷೇತ್ರ: ಪುಟ್ಟರಾಜು ಅಥವಾ ತಮ್ಮಣ್ಣಗೆ ಟಿಕೆಟ್‌

ಲೆಕ್ಕಾಚಾರ 2 ಬಿಜೆಪಿಗೆ ಕ್ಷೇತ್ರ: ಡಾ.ಸಿ.ಎನ್‌.ಮಂಜುನಾಥ್‌ ಕಣಕ್ಕೆ