ಬೆಂಗಳೂರು : ಮಾಜಿ ಸಚಿವ, ಶಾಸಕ ಜಮೀರ್ ಅಹಮದ್ ಖಾನ್ ಭಾನುವಾರ ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಉಪಚುನಾವಣೆಗೆ ಸಂಬಂಧಿಸಿ ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ವಿರುದ್ಧ ಇರುವ ಆರೋಪಕ್ಕೆ ಸ್ಪಷ್ಟನೆ
ಭಾನುವಾರ ಖರ್ಗೆ ಅವರನ್ನು ಸದಾಶಿವನಗರದ ನಿವಾಸದಲ್ಲಿ ಹಾಗೂ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಿಎಂರನ್ನು ಜಮೀರ್ ಭೇಟಿ ಮಾಡಿದರು. ಈ ಭೇಟಿ ವೇಳೆ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡಿರುವುದಕ್ಕೆ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಕುರಿತು ತಮ್ಮ ವಿರುದ್ಧ ಇರುವ ಆರೋಪಕ್ಕೆ ಸ್ಪಷ್ಟನೆ ನೀಡಿದರು.
ಬೇಸರ ಉಂಟಾಗಿದ್ದು ನಿಜ
ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಸಿಗದಿದ್ದಕ್ಕೆ ಬೇಸರ ಉಂಟಾಗಿದ್ದು ನಿಜ. ಆದರೆ, ಅಭ್ಯರ್ಥಿ ಆಯ್ಕೆ ಬಳಿಕ ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸುವಂತೆ ಸಮುದಾಯದ ಮುಖಂಡರಿಗೆ ತಿಳಿಸಿದ್ದೇನೆಯೇ ಹೊರತು ಯಾವುದೇ ಪಕ್ಷ ವಿರೋದಿ ಚಟುವಟಿಕೆ ನಡೆಸಿಲ್ಲ. ಈ ವಿಚಾರವಾಗಿ ವೈರಲ್ ಆಗಿರುವ ನನ್ನ ಸಂಭಾಷಣೆ ಎನ್ನಲಾದ ಆಡಿಯೋ ಕೂಡ ನನ್ನದಲ್ಲ, ನಕಲಿ ಎಂದು ಅಧ್ಯಕ್ಷರು ಹಾಗೂ ಸಿಎಂಗೆ ಸ್ಪಷ್ಟಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಸಂಪುಟ ವಿಸ್ತರಣೆ ವೇಳೆ ತಮಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು ಎಂದು ಹೇಳಲಾಗಿದೆ.
