ಬಾಟಂ...ಕಾಮನ್‌ ಪುಟಕ್ಕೆ,, 23 ರಂದು ರೈತರ ಬೃಹತ್ ಅಧಿವೇಶನ

| Published : Dec 19 2023, 01:45 AM IST / Updated: Dec 19 2023, 01:46 AM IST

ಬಾಟಂ...ಕಾಮನ್‌ ಪುಟಕ್ಕೆ,, 23 ರಂದು ರೈತರ ಬೃಹತ್ ಅಧಿವೇಶನ
Share this Article
  • FB
  • TW
  • Linkdin
  • Email

ಸಾರಾಂಶ

23 ರಂದು ರೈತರ ಬೃಹತ್ ಅಧಿವೇಶನ, ಮೈಸೂರು- ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ: ಕುರುಬೂರು ಶಾಂತಕುಮಾರ್ದೇಶದ ಎಲ್ಲಾ ರಾಜ್ಯಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ಕಿಸಾನ್ ಮಹಾ ಪಂಚಾಯತ್ ಕೇರಳದ ಪಾಲಕಾಡನಲ್ಲಿ ಡಿ.20, ತಮಿಳುನಾಡಿನ ಚೆನ್ನೈನಲ್ಲಿ ಡಿ.21, ಕರ್ನಾಟಕದ ಬೆಂಗಳೂರಿನಲ್ಲಿ ಡಿ.23, ತೆಲಂಗಾಣದ ಹೈದರಾಬಾದ್ ನಲ್ಲಿ ಡಿ.26 ರಂದು ರೈತರ ಬೃಹತ್ ಅಧಿವೇಶನಗಳನ್ನು ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

- ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ: ಕುರುಬೂರು ಶಾಂತಕುಮಾರ್

- ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲು ಆಗ್ರಹ----

ಕನ್ನಡಪ್ರಭ ವಾರ್ತೆ ಮೈಸೂರು

ದೇಶದ ಎಲ್ಲಾ ರಾಜ್ಯಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ಕಿಸಾನ್ ಮಹಾ ಪಂಚಾಯತ್ ಕೇರಳದ ಪಾಲಕಾಡನಲ್ಲಿ ಡಿ.20, ತಮಿಳುನಾಡಿನ ಚೆನ್ನೈನಲ್ಲಿ ಡಿ.21, ಕರ್ನಾಟಕದ ಬೆಂಗಳೂರಿನಲ್ಲಿ ಡಿ.23, ತೆಲಂಗಾಣದ ಹೈದರಾಬಾದ್ ನಲ್ಲಿ ಡಿ.26 ರಂದು ರೈತರ ಬೃಹತ್ ಅಧಿವೇಶನಗಳನ್ನು ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ರೈತರ ಬೆಳೆ ಸಾಲದ ಬಡ್ಡಿಮನ್ನಾ ಎನ್ನುವುದು ನಾಟಕೀಯವಾಗಿದೆ. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾಕ್ಕಾಗಿ ಡಿ.23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರೈತರ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಳೆದ 3 ವರ್ಷಗಳಿಂದ ಅತಿವೃಷ್ಟಿ, ಪ್ರವಾಹ ಹಾನಿ, ಅನಾವೃಷ್ಟಿಯಿಂದ ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿ ಬೆಳೆ ನಾಶವಾಗಿ ಕೈ ಸುಟ್ಟಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಸಾಲಮನ್ನಾ ಆಗಲೇಬೇಕು ಎಂದು ಅವರು ಆಗ್ರಹಿಸಿದರು.

ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು. ಇದೇ ದಿನ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಡಿ.23 ರಂದು ಸಾಲ ಮನ್ನಾ ಕೋರಿಕೆ ಅರ್ಜಿ ಸಲ್ಲಿಸಲಾಗುತ್ತದೆ. ಸಾಲ ಪಡೆದ ರೈತರೇ ಈ ಅಧಿವೇಶನಕ್ಕೆ ಸ್ವಯಂ ಪ್ರೇರಿತರಾಗಿ ಬರಬೇಕು ಎಂದು ಅವರು ಮನವಿ ಮಾಡಿದರು.

ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಈ ಕಾನೂನು ಜಾರಿ ಮಾಡಬೇಕು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ರಾಜ್ಯ ಸರ್ಕಾರ 2000 ರೂ. ಭಿಕ್ಷಾ ರೂಪದ ಪರಿಹಾರ ನೀಡುವುದು ಬೇಡ. ಸಂಪೂರ್ಣ ಬೆಳೆ ನಷ್ಟ ಪರಿಹಾರ ಕನಿಷ್ಠ 25000 ರು. ನೀಡಬೇಕು ಎಂದು ಅವರು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಸಕ್ಕರೆ ರಪ್ತು ನಿಷೇಧ, ಯಥೆನಾಲ್ ಉತ್ಪಾದನೆಗೆ ತಡೆ ಹಾಕಿರುವುದು ಕಬ್ಬು ಬೆಳೆಯುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಮರುಪರಿಶೀಲನೆ ನಡೆಸಲಿ ಎಂದು ಅವರು ಆಗ್ರಹಿಸಿದರು.

ಪಂಜಾಬ್ ರಾಜ್ಯದಲ್ಲಿ ಟನ್ ಕಬ್ಬಿಗೆ 4000 ರು. ನಿಗದಿ ಮಾಡಿದ್ದಾರೆ. ರಾಜ್ಯದಲ್ಲಿ 2- 3 ಸಭೆಗಳಾದರೂ ಬಣ್ಣಾರಿ ಸಕ್ಕರೆ ಕಾರ್ಖಾನೆ ಮಣಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ತೂಕದಲ್ಲಿ ಮೋಸ, ಇಳುವರಿಯಲ್ಲಿ ಮೋಸ, ಹಣ ಪಾವತಿಯಲ್ಲಿ ಮೋಸ ಮಾಡುತ್ತಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಬಣ್ಣಾರಿ ಕಾರ್ಖಾನೆ ವಂಚನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಿ ಎಂದು ಅವರು ಆಗ್ರಹಿಸಿದರು.

ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ರೂ. ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇ.10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು. ರೈತರ ಮಕ್ಕಳು ಕೃಷಿಯಿಂದ ವಲಸೆ ಹೋಗುವುದನ್ನು ತಪ್ಪಿಸಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು. ಬಗರ್ ಹುಕುಂ ಸಾಗುವಳಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಅಡೆತಡೆಗಳನ್ನು ನಿವಾರಿಸಿ ಕೂಡಲೇ ಸಾಗುವಳಿ ಪತ್ರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ವೆಂಕಟೇಶ್, ಹೆಗ್ಗೂರು ರಂಗರಾಜು, ನೀಲಕಂಠಪ್ಪ, ವಾಜಮಂಗಲ ಮಹದೇವ ಇದ್ದರು.

----

ಕೋಟ್...

ರೈತರ ಸಾಲ ಮನ್ನಾ ಆಗದಂತೆ ವಂಚಿಸಲು ಬ್ಯಾಂಕುಗಳು ಬಡ್ಡಿ ದುಪ್ಪಟ್ಟು ಆಗುತ್ತದೆ, ಸುಸ್ತಿಯಾಗುತ್ತದೆ ಎಂದು ಹೆದರಿಸಿ ಆಂಗ್ಲ ಭಾಷೆಯ ಪತ್ರಕ್ಕೆ ರೈತರ ಸಹಿ ಪಡೆದು, ಸಾಲ ನವೀಕರಣ ಮಾಡುತ್ತಿದ್ದಾರೆ. ಇದರಿಂದ ರೈತರು ಸಾಲ ಮನ್ನಾದಿಂದ ವಂಚಿತವಾಗುತ್ತಾರೆ. ಈ ಬಗ್ಗೆ ರೈತರು ಜಾಗೃತರಾಗಿರಬೇಕು.

- ಕುರುಬೂರು ಶಾಂತಕುಮಾರ್, ಅಧ್ಯಕ್ಷರು, ರಾಜ್ಯ ಕಬ್ಬು ಬೆಳೆಗಾರರ ಸಂಘ