ಸಾರಾಂಶ
ಬಿಬಿಎಂಪಿಯಿಂದ ನಿರ್ಮಾಣ ಆಗಿರುವ ವೈಟ್ಟಾಪಿಂಗ್ ರಸ್ತೆಯಲ್ಲಿ ಗುಂಡಿ ಸೃಷ್ಟಿಯಾಗಿರುವುದನ್ನು ಖಂಡಿಸಿ ಎಎಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬೆಂಗಳೂರು
ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ನಗರದ ಹಲಸೂರು ಕೆರೆ ಬಳಿಯ ಡಿ. ಭಾಸ್ಕರನ್ ರಸ್ತೆಯಲ್ಲಿ ಗುಂಡಿ ಬಿದ್ದ ಸ್ಥಳಕ್ಕೆ ಬುಧವಾರ ಪೂಜೆ ಸಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಆಮ್ ಆದ್ಮಿ ಪಕ್ಷದವರು ರಸ್ತೆ ಕುಸಿತಕ್ಕೆ ಕಳಪೆ ಕಾಮಗಾರಿ, ಭ್ರಷ್ಟಾಚಾರ ಕಾರಣ ಎಂದು ಆರೋಪಿಸಿದರು.ಆಮ್ ಆದ್ಮಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ವೈಟ್ ಟಾಪಿಂಗ್ ಹೆಸರಿನಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಕೇವಲ ಒಂದು ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು ಮಾಡಲಾಗಿದೆ. ಇಷ್ಟು ಹಣ ಖರ್ಚು ಮಾಡಿದರೂ, ರಸ್ತೆ ಕೇವಲ ಒಂಭತ್ತೇ ತಿಂಗಳಲ್ಲಿ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫರೀದುದ್ದೀನ್ ಶರೀಫ್, ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಮಹಿಳಾ ಮುಖಂಡೆ ಮರಿಯಾ ಹಲವರಿದ್ದರು.--
ಫೋಟೋ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಡಿ.ಭಾಸ್ಕರನ್ ರಸ್ತೆಯಲ್ಲಿ ಗುಂಡಿ ಬಿದ್ದ ಸ್ಥಳಕ್ಕೆ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು.