ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ

| Published : Nov 10 2023, 01:02 AM IST / Updated: Nov 10 2023, 01:03 AM IST

ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಅಧಿಕಾರಿಗಳು ಜನರಿಗೆ ಬಾಲ್ಯವಿವಾಹದಿಂದ ಆಗಬಹುದಾದ ದುಷ್ಪರಿಣಾಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹವು ಹೆಚ್ಚಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳ ಬಗ್ಗೆ ಯಾರು ಕೂಡ ಮೌನ ವಹಿಸಬಾರದು. ಮುಕ್ತವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜೊತೆ ಮಾತನಾಡಿ ಕಾನೂನಿನ ಸೌಲಭ್ಯ ಪಡೆಯಬಹುದು. ಪೋಷಕರು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಬೇಕು ಎಂದು ಅವರು ತಿಳಿಸಿದರು.

ಚಾಮರಾಜನಗರದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನ ಆಚರಣೆ । ನ್ಯಾ. ಬಿ.ಎಸ್.ಭಾರತಿ ಕರೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳು ಬಾಲ್ಯವಿವಾಹ ತಡೆಗಟ್ಟಲು ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕಾನೂನು ಸೇವಾದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಜನರಿಗೆ ಬಾಲ್ಯವಿವಾಹದಿಂದ ಆಗಬಹುದಾದ ದುಷ್ಪರಿಣಾಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹವು ಹೆಚ್ಚಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳ ಬಗ್ಗೆ ಯಾರು ಕೂಡ ಮೌನ ವಹಿಸಬಾರದು. ಮುಕ್ತವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜೊತೆ ಮಾತನಾಡಿ ಕಾನೂನಿನ ಸೌಲಭ್ಯ ಪಡೆಯಬಹುದು. ಪೋಷಕರು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಬೇಕು ಎಂದು ಅವರು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ. ಎಂ ಮಾತನಾಡಿ, ಜನರಿಗೆ ಕಾನೂನಿನ ಸಾಮಾನ್ಯ ಅರಿವು ಅಗತ್ಯವಾಗಿದೆ. ಕಾನೂನಿನ ಅರಿವು ಮತ್ತು ನೆರವಿನ ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಒದಗಿಸುತ್ತದೆ. ಪರಿಶಿಷ್ಟ ಜಾತಿ, ಪಂಗಡ, ಮಹಿಳೆಯರು, ಮಕ್ಕಳು ಹಾಗೂ 3 ಲಕ್ಷ ರು. ಗಿಂತ ಕಡಿಮೆ ಆದಾಯವಿರುವ ಎಲ್ಲಾ ವರ್ಗದ ಜನರಿಗೆ ಕಾನೂನು ಪ್ರಾಧಿಕಾರ ನೆರವು ನೀಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಕ್ಕಳಿಗೆ ಮದುವೆ ಮಾಡಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಮೊದಲು ಉತ್ತೇಜನ ನೀಡಬೇಕು. ಬಾಲ್ಯ ವಿವಾಹದಿಂದ ಅಪ್ರಾಪ್ತರ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಕಿರಣ್ ಪಡ್ನೇಕರ್ ಮಾತನಾಡಿ, ಅರಿವಿನ ಕೊರತೆಯಿಂದ ಬಾಲ್ಯವಿವಾಹ ಹೆಚ್ಚಾಗುತ್ತಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಪೊಲೀಸ್ ಇಲಾಖೆ ಹೀಗೆ ಎಲ್ಲಾ ಇಲಾಖೆಗಳ ಪಾತ್ರವು ಬಾಲ್ಯವಿವಾಹ ತಡೆಗೆ ಅವಶ್ಯಕವಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನಿನ ಅರಿವು ಅವಶ್ಯಕವಾಗಿದೆ. ಬಾಲ್ಯವಿವಾಹಕ್ಕೆ ಹಲವಾರು ಕಾರಣಗಳಿವೆ, ಅತೀ ಮುಖ್ಯವಾಗಿ ಬಡತನ, ಶಿಕ್ಷಣದ ಕೊರತೆಯಿಂದ ಹೆಚ್ಚು ಬಾಲ್ಯವಿವಾಹಗಳು ನಡೆಯುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿ ಲಕ್ಷ್ಮಿಪ್ರಸನ್ನರವರು ಬಾಲ್ಯವಿವಾಹ ನಿಷೇಧ ಕಾಯ್ದೆಗಳು, ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಇದೇ ವೇಳೆ ಗಣ್ಯರು ಬಾಲ್ಯವಿವಾಹ ನಿಷೇಧದ ಕಾನೂನಿನ ಕುರಿತ ಪೋಸ್ಟರ್ ಬಿಡುಗಡೆಗೊಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೆಲುವರಾಜು. ಕೊಳ್ಳೇಗಾಲದ ಪಿ.ಎಂ.ಎಸ್.ಆರ್. ಸಂಸ್ಥೆಯ ನಿರ್ದೇಶಕರಾದ ಆರ್ಡಿಸ್ ಅರ್ನಾಲ್ಡ್, ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್, ಕರ್ನಾಟಕ ಬಾಲ್ಯವಿವಾಹ ವಿರೋಧ ವೇದಿಕೆ ಕೋಆರ್ಡಿನೇಟರ್, ಅಡ್ವೋಕೇಟ್ ವೆಂಕಟೇಶ್ ಉಪಸ್ಥಿತರಿದ್ದರು.

-------------------

9ಸಿಎಚ್‌ಎನ್‌61

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಕಾರ್ಯಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.

--------------