ಸಾರಾಂಶ
ಬೆಂಗಳೂರು : ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹುಲ್ಲುಗಾವಲಿನ 5678.32 ಎಕರೆ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ’ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶವೆಂದು ಘೋಷಿಸಲು ನಿರ್ಧಾರ ಮಾಡಿತ್ತು. ಇದೀಗ ಗ್ರೇಟರ್ ಹೆಸರಘಟ್ಟ ಕನ್ಸರ್ವೇಷನ್ ರಿಸರ್ವ್ (ಗ್ರೇಟರ್ ಹೆಸರಘಟ್ಟ ಸಂರಕ್ಷಿತ ಮೀಸಲು) ಪ್ರದೇಶವೆಂದು ಘೋಷಿಸಿ ಅದನ್ನು ಸಂರಕ್ಷಣೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಹೆಸರಘಟ್ಟ ಹುಲ್ಲುಗಾವಲಿನ 356 ಎಕರೆ, ಬೈರಾಪುರ ಕೆರೆಯ 383 ಎಕರೆ, ಬೈತಾ ಕೆರೆಯ 165 ಎಕರೆ, ಹೆಸರಘಟ್ಟ ಕೆರೆಯ 1356 ಎಕರೆ ಮತ್ತು ಪಶು ಸಂಗೋಪನಾ ಇಲಾಖೆ ಸ್ವಾಧೀನದಲ್ಲಿರುವ 2,750 ಎಕರೆ ಸೇರಿ ಒಟ್ಟು 5,678 ಎಕರೆ ಪ್ರದೇಶವನ್ನು ವನ್ಯಜೀವಿ (ಸಂರಕ್ಷಣಾ) ಕಾಯಿದೆ- 1972ರ ಸೆಕ್ಷನ್ 36 ''''''''ಎ'''''''' ಪ್ರಕಾರ ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶವನ್ನಾಗಿ ಘೋಷಿಸಲು ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.
ವಿಪತ್ತು ತಡೆಗೆ ₹5,000 ಕೋಟಿ ವೆಚ್ಚದ ಯೋಜನೆ:
ಇನ್ನು ಮಳೆಯಿಂದ ನಗರದಲ್ಲಿ ಆಗುತ್ತಿರುವ ವಿಪತ್ತು ತಡೆಗೆ ವಿಶ್ವ ಬ್ಯಾಂಕ್ ನೆರವಿನಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರು. ವೆಚ್ಚದ ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ನಿಯಂತ್ರಣ ಯೋಜನೆ ಜಾರಿಗೆ ತೀರ್ಮಾನ ಮಾಡಲಾಗಿದೆ. ಈ ಪೈಕಿ ವಿಶ್ವಬ್ಯಾಂಕ್ನ 3,500 ಕೋಟಿ ರು. ಸಾಲ ಸೇರಿದಂತೆ ರಾಜ್ಯ ಸರ್ಕಾರದಿಂದ 1,500 ಕೋಟಿ ರು. ಸೇರಿಸಿ ಒಟ್ಟು 5,000 ಕೋಟಿ ರು. ವೆಚ್ಚ ಮಾಡಲಾಗುವುದು.
ಯೋಜನೆಯ ಅನುಷ್ಠಾನದ ಮೇಲ್ವಿಚಾರಣೆಗೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರ ಸಮಿತಿ ರಚಿಸಲು ಸಹ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.