ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಸ್ಪೀಕರ್‌ ಖಾದರ್‌ ಹೇಳಿದರು.

 ವಿಧಾನಸಭೆ : ಈ ಬಾರಿಯ ಟಿ20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಭಾರತ ತಂಡ ಹಾಗೂ ತಂಡದ ಕೋಚ್‌ ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರಿಗೆ ವಿಧಾನಸಭೆಯಲ್ಲಿ ಸೋಮವಾರ ಅಭಿನಂದನೆ ಸಲ್ಲಿಸಲಾಯಿತು.

ಮಧ್ಯಾಹ್ನ ಭೋಜನ ವಿರಾಮದ ಬಳಿಕ ಪ್ರಶ್ನೋತ್ತರ ಅವಧಿ ಮುಕ್ತಾಯಗೊಂಡ ನಂತರ ಸ್ಪೀಕರ್ ಯು.ಟಿ. ಖಾದರ್ ಅವರು ರಾಹುಲ್ ದ್ರಾವಿಡ್‌ಗೆ ಸದನದ ಪರವಾಗಿ ಅಭಿನಂದನೆ ಸಲ್ಲಿಸಿದರು. 

ಕರ್ನಾಟಕದ ಹೆಮ್ಮೆಯ ಪುತ್ರ, ಕ್ರಿಕೆಟ್ ಗೋಡೆ ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೋಚ್‌ ರಾಹುಲ್ ದ್ರಾವಿಡ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಸದ್ಯಕ್ಕೆ ಟೆಸ್ಟ್‌, ಏಕದಿನ ನಿವೃತ್ತಿಯಿಲ್ಲ: ರೋಹಿತ್‌

ಡಲ್ಲಾಸ್‌(ಅಮೆರಿಕ): ಟಿ20 ವಿಶ್ವಕಪ್‌ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿರುವ ಭಾರತೀಯ ಕ್ರಿಕೆಟಿಗ ರೋಹಿತ್‌ ಶರ್ಮಾ, ಟೆಸ್ಟ್‌ ಹಾಗೂ ಏಕದನದಿಂದ ಸದ್ಯದಲ್ಲಿ ನಿವೃತ್ತಿಯಾಗುವುದಿಲ್ಲ ಎಂದಿದ್ದಾರೆ. 

ಈ ಬಗ್ಗೆ ಭಾನುವಾರ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಇನ್ನಷ್ಟು ಕಾಲ ಮುಂದುವರಿಯಲಿದ್ದೇನೆ ಎಂದಿದ್ದಾರೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು, ರೋಹಿತ್‌ ನಾಯಕತ್ವದಲ್ಲೇ 2025ರ ಚಾಂಪಿಯನ್ಸ್‌ ಟ್ರೋಫಿ ಹಾಗೂ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದರು.