ಸಾರಾಂಶ
ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ ಮೂಲಕ ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧ ಇಡೀ ವಲಯ ಮತ್ತು ವಿಶ್ವದ ಪಾಲಿಗೆ ಅತ್ಯಂತ ಮಹತ್ವದ್ದು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ ಮೂಲಕ ಉಭಯ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಅರುಣಾಚಲ ಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಅಮೆರಿಕದ ನ್ಯೂಸ್ವೀಕ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಭಾರತ ಮತ್ತು ಚೀನಾ ದೇಶಗಳ ನಡುವೆ ಹಲವು ಸಮಸ್ಯೆಗಳಿರುವುದು ನಿಜ. ಆದರೆ ಅದನ್ನು ಉಭಯ ದೇಶಗಳು ದ್ವಿಪಕ್ಷೀಯ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕಿದೆ. ಇದರಿಂದ ಕೇವಲ ನಮ್ಮ ನೆರೆಯ ರಾಷ್ಟ್ರಗಳಿಗಷ್ಟೇ ಅಲ್ಲ. ಇಡೀ ಜಗತ್ತಿಗೇ ಲಾಭವಾಗಲಿದ್ದು, ಹೊಸ ಮನ್ವಂತರ ಸೃಷ್ಟಿಯಾಗಲಿದೆ’ ಎಂದು ಬಣ್ಣಿಸಿದರು.ಇದೇ ವೇಳೆ ಪಾಕಿಸ್ತಾನದ ಜೊತೆಗಿನ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿ, ‘ಭಯೋತ್ಪಾದನೆ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಇಡೀ ವಲಯದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಯನ್ನು ಬಯಸುತ್ತೇವೆ’ ಎಂದು ಹೇಳಿದ್ದಾರೆ.